Monday, August 3, 2026
Homeಸೂರ್ಯಗಗನI ಬಡವರ ಕೈಯಲ್ಲಿ I ಹಣ ಬಂದಾಗ ಮಾತ್ರ ದೇಶದ ಪ್ರಗತಿ I ರಾಜ್ಯ ಕಾರ್ಮಿಕ...

I ಬಡವರ ಕೈಯಲ್ಲಿ I ಹಣ ಬಂದಾಗ ಮಾತ್ರ ದೇಶದ ಪ್ರಗತಿ I ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ I

I ಬಡವರ ಕೈಯಲ್ಲಿ I ಹಣ ಬಂದಾಗ ಮಾತ್ರ ದೇಶದ ಪ್ರಗತಿ I ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ I

ಶಿವಮೊಗ್ಗ, : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಭವನ ಲೋಕಾರ್ಪಣೆ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಮಹತ್ವಪೂರ್ಣವಾದ ಬಿಲ್‌ಗಳನ್ನು ಪಾಸ್ ಮಾಡಿದೆ. ಅಮೇಜಾನ್, ಸ್ವಿಗ್ಗಿ, ಝೊಮ್ಯಾಟೊ ಬ್ಲಿಂಕ್‌ಇಟ್‌ಗಳಲ್ಲಿ ಕೆಲಸ ಮಾಡುವ 5 ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ರಾಜ್ಯದಲ್ಲಿ ಇದ್ದಾರೆ. ಅವರಿಗಾಗಿಯೇ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಸಮರ್ಪಕವಾದ ಗಿಗ್ ಬಿಲ್ ಪಾಸ್ ಆಗಿದೆ. ಸಾಗಾಣಿಕೆ ದರದ ಮೇಲೆ 1 ರಿಂದ 5% ಹಣ ಮತ್ತು ಸರ್ಕಾರ ನೀಡುವ ಹಣದಿಂದ ಅವರಿಗೆ ಅನುಕೂಲ ಮಾಡಲಾಗುತ್ತಿದೆ. ಎರಡನೆಯದು ಸಹನಟರು, ಟಿಕೆಟ್ ನೀಡುವವರು, ತಂತ್ರಜ್ಞರು, ಪೌರಾಣಿಕ ನಾಟಕ ನಟರು ಸೇರಿದಂತೆ ಹಿನ್ನೆಲೆಯಲ್ಲಿ ಕೆಲಸ ಮಾಡುವ ಕೆಲಸಗಾರಗಾಗಿ ಸಿನಿ ಬಿಲ್ ಪಾಸ್ ಮಾಡಿದ್ದು, ಶೇ. 1 ರಿಂದ 2 ಸೆಸ್ ಮತ್ತು ಸರ್ಕಾರದ ಹಣ ಸೇರಿಸಿ ಅನುಕೂಲ ಮಾಡಲಾಗಿದೆ. ಹಾಗೂ ಕಮರ್ಷಿಯಲ್ ಡ್ರೈವರ್ ಕ್ಲೀನರ್, ಮೆಕ್ಯಾನಿಕ್ ಇತರೆ ಕಾರ್ಮಿಕರ ಸಾರಿಗೆ ಬಿಲ್ ಪಾಸ್ ಮಾಡಿದ್ದು, ಅಪಘಾತ, ಮರಣ ಅಥವಾ ತೊಂದರೆಯಾದಲ್ಲಿ ರೂ. 5 ಲಕ್ಷ ನೀಡುವ ಯೋಜನೆ ಜಾರಿಗೆ ತರಲಾಗಿದೆ. ಪ್ರತಿ ತಾಸಿಗೆ 20 ಸಾವಿರ ಮರಣ ಸಂಭವಿಸುತ್ತಿದ್ದು ಪ್ರತಿ ದಿನ 480 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ದುಡಿಯುವ ವರ್ಗವೇ ಇದಕ್ಕೆ ಹೆಚ್ಚು ಬಲಿಯಾಗುತ್ತಿರುವ ಕಾರಣ ದೇಶದ ಜಿಡಿಪಿಗೆ ಶೇ.3 ನಷ್ಟವಾಗುತ್ತಿದೆ. ಸಭೆಗಳಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳು ಅಪಘಾತ ಆಗದಂತೆ ಅರಿವು ಮೂಡಿಸಿ, ಹೆಲ್ಮೆಟ್ ಕಡ್ಡಾಯಗೊಳಿಸಬೇಕು ಎಂದರು.

20 ಜನರಿಗಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುವೆಡೆ ಮಾಲೀಕರು 5 ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯವಾಗಿ ಗ್ರಾಚುಟಿ ಪಾವತಿಸಬೇಕು. ಈ ರೀತಿಯ 6 ಸಾವಿರ ಕಂಪೆನಿಗಳು ಇಲಾಖೆಯಡಿ ನೋಂದಣಿಯಾಗಿದ್ದು, ಅಧಿಕಾರಿಗಳು ಗ್ರಾಚುಟಿ ಪಾವತಿ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು.
ಎಸ್‌ಸಿ/ ಎಸ್‌ಟಿ ಯವರಿಗೆ ಕೆಲಸ ನೀಡುವ ಖಾಸಗಿ ಸಂಸ್ಥೆ, ಕಂಪೆನಿಗೆ ಕಾರ್ಮಿಕ ಇಲಾಖೆಯಿಂದ ಅವರಿಗೆ ಪಾವತಿಸಲು ಶೇ. 50 ಹಣ ನೀಡುವ ದೇಶದಲ್ಲೇ ಪ್ರಪ್ರಥಮ ಯೋಜನೆ ‘ಆಶಾದೀಪ’ ಕಾರ್ಮಿಕರ ಪಾಲಿಗೆ ಆಶಾದೀಪವಾಗಿದೆ. ಇದೇ ಮೊದಲ ಬಾರಿಗೆ ಇಲಾಖೆಯು 91 ಸಣ್ಣ ಸಣ್ಣ ಕೆಲಸ ಮಾಡುವ ಸಮುದಾಯಗಳನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ. ಅಸಂಘಟಿತ ವರ್ಗದ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಿಗಾಗಿ ಡೀಸೆಲ್, ಪೆಟ್ರೋಲ್ ನಿಂದ 50 ಪೈಸಾ ದಿಂದ 1 ರೂ. ಸೆಸ್ ನೀಡಿದಲ್ಲಿ ಅನುಕೂಲವಾಗುತ್ತದೆ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಸರ್ಕಾರ ರೂ. 56 ಸಾವಿರ ಕೋಟಿಯಿಂದ 60 ಸಾವಿರ ಕೋಟಿವರೆಗೆ ಇದಕ್ಕಾಗಿ ಪ್ರತಿ ವರ್ಷ ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ಅಭಿವೃದ್ಧಿಗಾಗಿ ನೀಡಿದೆ. ಶಕ್ತಿ ಯೋಜನೆಯಿಂದ ಹೆಣ್ಣು ಮಕ್ಕಳ ಓಡಾಟ ಹೆಚ್ಚಿದೆ. ಶೇ.40 ಹೆಣ್ಣು ಮಕ್ಕಳ ಪ್ರಯಾಣ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳಡಿ ಬಡವರಿಗೆ ನೀಡುತ್ತಿರುವುದು ಉಳಿತಾಯಕ್ಕಾಗಿ ಅಲ್ಲ. ಆ ಹಣ ಸಂಪೂರ್ಣವಾಗಿ ಮತ್ತೆ ಮಾರುಕಟ್ಟೆಗೆ ವಾಪಸ್ ಬರುತ್ತಿರುವ ಕಾರಣ ರಾಜ್ಯದ ಜಿಡಿಪಿ ಭಾರತದಲ್ಲಿ ನಂ.1 ಕ್ಕೇರಿದೆ.
ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ. ದೇಶದ ಜಿಡಿಪಿ 4 ನೇ ಸ್ಥಾನದಲ್ಲಿದೆ. ರಾಜ್ಯದ ತಲಾ ಆದಾಯ ಸರಾಸರಿ ರೂ. 2 ಲಕ್ಷ ಇದೆ. ದೇಶ ಪ್ರಗತಿ ಆಗಬೇಕಾದರೆ ಪ್ರತಿಯೊಬ್ಬರ ಕೈಯಲ್ಲಿ ಹಣ ಬರಬೇಕು. ವಿವಿಧ ದೇಶಗಳ ಅಭಿವೃದ್ದಿ, ಅನ್ವೇಷಣೆ, ಸಂಶೋಧನೆ, ವಿಜ್ಞಾನಗಳ ಬಗ್ಗೆ ಚರ್ಚಿಸಬೇಕು. ಸಮಾಜ ಸುಧಾರಣೆ ನಿಟ್ಟಿನಲ್ಲಿ ಚರ್ಚೆ ಆಗಬೇಕು. ವಿಚಾರಗಳ ಬಗ್ಗೆ ವಿಮರ್ಶೆ ಆದಾಗ ಬದಲಾವಣೆ ಸಾಧ್ಯ. ರೈತರಿಗೆ ಅನುಕೂಲವಾಗುವಂತಹ ನಿರ್ಧಾರಗಳು ಆಗಬೇಕು. ಆನ್‌ಲೈನ್ ಬೆಟ್ಟಿಂಗ್ ನಿಲ್ಲಬೇಕು. ಕ್ರಿಕೆಟ್ ಬಿಸಿಸಿಐ ಬದಲಾಗಿ ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆ ಅಡಿ ಬರಬೇಕು ಎಂದು ಮನವಿ ಮಾಡಿದರು.

ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾರ್ಮಿಕರು ದೇಶದ ಆಸ್ತಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ತಲುಪಿಸುತ್ತಿದೆ. ವಲಸೆ ಕಾರ್ಮಿಕರಿಗೆ ಅನುಕೂಲವಾಗಲೆಂದು ಸಿದ್ಲಿಪುರದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳು ಹಾಗೂ ಸಮುದಾಯ ಭವನ ಲೋಕಾರ್ಪಣೆ ಮಾಡುತ್ತಿರುವುದು ಅತ್ಯಂತ ಸಂತಸದ ವಿಷಯ. ಅದೇ ರೀತಿಯಲ್ಲಿ ಕಾರ್ಮಿಕರಿಗೆ ಅನುಕೂಲವಾಗಲು ಶಿಕಾರಿಪುರ ಮತ್ತು ಸಾಗರದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸಚಿವರು ಸಹಕರಿಬೇಕು. ದೇಶದಲ್ಲಿ 31 ಕೋಟಿ ಅಸಂಘಟಿತ ಕಾರ್ಮಿಕರಿದ್ದು ಅದರಲ್ಲಿ ಶೇ.54 ಮಹಿಳಿಯರಿದ್ದಾರೆ. ಜಿಲ್ಲೆಯಲ್ಲಿ 3.5 ಲಕ್ಷ ಅಸಂಘಟಿತ ಕಾರ್ಮಿಕರು ನೋಂದಣಿಯಾಗಿದ್ದು ಇಶ್ರಮ್ ಕಾರ್ಡ್ ನೀಡಲಾಗುತ್ತಿದೆ. ಒನ್ ನೇಷನ್ ಒನ್ ಕಾರ್ಡ್ ಕೊಡಲು ಕ್ರಮ ವಹಿಸಲಾಗುತ್ತಿದೆ. 60 ವರ್ಷ ತುಂಬಿದವರಿಗೆ ರೂ. 3000 ಪಿಂಚಣಿ ನೀಡಲಾಗುವುದು.

ಕಾರ್ಮಿಕ ಸಚಿವರು ಕಾರ್ಮಿಕರ ಪರವಾಗಿ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಇಎಸ್‌ಐ ಸೌಲಭ್ಯ ಪಡೆಯಲು ರೂ. 21 ಸಾವಿರ ಆದಾಯ ಮಿತಿ ಇದ್ದು ಇದನ್ನು 30 ಸಾವಿರಕ್ಕೆ ವಿಸ್ತರಣೆ ಮಾಡುವ ಪ್ರಯತ್ನ ನಡೆಯುತ್ತಿದೆ. ಭದ್ರಾವತಿ ಉಕ್ಕಿನ ಕಾರ್ಖಾನೆಗೆ ಮರು ಜೀವ ನೀಡಲು ಚರ್ಚೆ ನಡೆಯುತ್ತಿದೆ. ಬಂಡವಾಳ ಹೂಡಲು ಕೇಂದ್ರ ಸರ್ಕಾರ ಮುಂದೆ ಬಂದಿದೆ. ಇದಕ್ಕೆ  ಕೇಂದ್ರದಲ್ಲಿ 2 ಕಡತ ಬಾಕಿ ಇದ್ದು, ಅದು ವಿಲೇ ಆದ ನಂತರ 8-10 ಕೋಟಿ ಅನುದಾನ ತಂದು ಮರು ಜೀವ ಕೊಡುವ ಪ್ರಯತ್ನ ಮಾಡಲಾಗುತ್ತಿದೆ. ಎಂಪಿಎ ಮತ್ತು ವಿಐ ಎಸ್ ಎಲ್ ಕಾರ್ಖಾನೆಗಳಿಗೆ ಜೀವ ಬಂದಲ್ಲಿ 20 ರಿಂದ 25 ಸಾವಿರ ಕಾರ್ಮಿಕರಿಗೆ ಶಕ್ತಿ ಬರಲಿದೆ ಈ ನಿಟ್ಟಿನಲ್ಲಿ ಕಾರ್ಮಿಕರು ಸಚಿವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ರಾಜ್ಯದಲ್ಲಿ ಸದಾ ಕಾರ್ಮಿಕರ ಏಳ್ಗೆಗಾಗಿ ಶ್ರಮ ವಹಿಸುತ್ತಿರುವ ಕಾರ್ಮಿಕ ಸಚಿವರಿಗೆ ಅಭಿನಂದನೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಕಾರ್ಮಿಕರ ಭವನ ನಿರ್ಮಿಸಲು ಸಹಕರಿಬೇಕು. ಅಡುಗೆ ಬಡಿಸುವವರನ್ನೂ ಅಸಂಘಟಿತ ಕಾರ್ಮಿಕರ ಪಟ್ಟಿಗೆ ಸೇರಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹೆಚ್ಚಿಸಬೇಕೆಂದು ಮನವಿ ಮಾಡಿದರು.
ಕಾರ್ಮಿಕ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಎಸ್.ಬಿ ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಚಿವರು ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ಕಾರ್ಡ್ ಮತ್ತು ಮೃತಪಟ್ಟವರ ಅವಲಂಬಿತರಿಗೆ ಚೆಕ್ ವಿತರಿಸಿದರು.

ಶಾಸಕರಾದ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಸೂಡಾ ಅಧ್ಯಕ್ಷ ಸುಂದರೇಶ್, ಕಾರ್ಮಿಕ ಆಯುಕ್ತರಾದ ಡಾ.ಗೋಪಾಲಕೃಷ್ಣ , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಗಳಾದ ಭಾರತಿ, ಜಿ.ಪಂ.ಸಿಇಒ ಹೇಮಂತ್. ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರು, ಜಿಲ್ಲಾ ಕಾರ್ಮಿಕ ಅಧಿಕಾರಿ, ಮುಖಂಡರು, ಕಾರ್ಮಿಕರು, ಸಾರ್ವಜನಿಕರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I