I ಸಾಮಾಜಿಕ ಸಮಸ್ಯೆಗಳ I ಪರಿಹರಿಸುವಲ್ಲಿ ಯುವಶಕ್ತಿ ಪಾತ್ರ ಅಪಾರ I ಪ್ರೊ. ಎ.ಷಣ್ಮುಖ I
ಶಿವಮೊಗ್ಗ: ಸಾಮಾಜಿಕ ಪರಿವರ್ತನೆಯಲ್ಲಿ ಯುವಶಕ್ತಿ, ಸಮುದಾಯ ಹಾಗೂ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎ.ಷಣ್ಮುಖ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸ್ತುತ ರಾಜಕಾರಣ ಮತ್ತು ಸಾಮಾಜಿಕ ಚಳವಳಿ ಕುರಿತು ಮಾತನಾಡಿ, ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸಲು ಪ್ರತಿಯೊಬ್ಬ ನಾಗರಿಕನೂ ಪ್ರಜ್ಞಾಪೂರ್ವಕ ಭಾವನೆಯೊಂದಿಗೆ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ ಮಾಹಿತಿ ಹೊಂದಿರುವುದು ಅಗತ್ಯ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನರು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜತೆಯಲ್ಲಿ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಅನುಕೂಲವಾಗುತ್ತವೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದುರಗಪ್ಪ ಮುಂಡಗಿ, ಪ್ರಾಧ್ಯಾಪಕರಾದ ಡಾ. ಸುರೇಶ್ ಆರ್., ಅಭಿಷೇಕ್ ಜಿ.ಎಸ್., ಸಂತೋಷ್ ಕುಮಾರ್ ಕೆ.ಹೆಚ್. ಹಾಗೂ ಇತರ ಅಧ್ಯಾಪಕರು ಉಪಸ್ಥಿತರಿದ್ದರು.

