I ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಪತ್ರಿಕಾ ದಿನಾಚರಣೆ I ಜಿಲ್ಲಾಧ್ಯಕ್ಷ ಡಿ.ಜಿ. ನಾಗರಾಜ್ I
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಸಂಘದ ಎರಡನೇ ವಾರ್ಷಿಕೋತ್ಸವ, ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಡಿ.ಜಿ. ನಾಗರಾಜ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು,
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷರಾದ ಡಿ.ಜಿ.ನಾಗರಾಜ್ ಅವರು ಮಾತನಾಡಿ, ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ಮೇ.3ರ ಭಾನುವಾರ ಬೆಳಿಗ್ಗೆ 10.30ಕ್ಕೆ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಈ ಸಂಭ್ರಮದ ಕಾರ್ಯಕ್ರಮ ನಡೆಯಲಿದೆ. ಹಿರಿಯ ಪತ್ರಕರ್ತರು ಹಾಗೂ ಸಂಘದ ಮಾಧ್ಯಮ ಸಲಹೆಗಾರರಾದ ಜಗಳೂರು ಲಕ್ಷ್ಮಣರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧ್ಯಕ್ಷ ಡಿ.ಜಿ. ನಾಗರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಈ ಬಾರಿಯ ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ಪತ್ರಿಕೋದ್ಯಮ ಸೇವೆಗೆ ವಿಶೇಷ ಒತ್ತು ನೀಡಲಾಗಿದೆ:
- ವಿದ್ಯಾರ್ಥಿ ವೇತನ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ನಗರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸಂಘದ ಸದಸ್ಯರ ಮಕ್ಕಳು ಸೇರಿದಂತೆ ಒಟ್ಟು 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
- ಪತ್ರಕರ್ತರಿಗೆ ಪ್ರಶಸ್ತಿ: ವೃತ್ತಿಪರತೆ ಮೆರೆದ ಸಮಾನ ಮನಸ್ಕ 10 ಮಂದಿ ವರದಿಗಾರರಿಗೆ ಹಾಗೂ 5 ಮಂದಿ ಸಂಪಾದಕರಿಗೆ ಅತ್ಯುತ್ತಮ ಪತ್ರಿಕಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
- ಸನ್ಮಾನ: ಪತ್ರಿಕಾ ವಿತರಕರ ಸಂಘದ ಮುಖ್ಯಸ್ಥರಿಗೆ ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಈ ಸಂದರ್ಭದಲ್ಲಿ ಸನ್ಮಾನ ಏರ್ಪಡಿಸಲಾಗಿದೆ.
ಇತ್ತೀಚೆಗೆ ನಿಧನರಾದ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸಿ.ವಿ. ರಾಘವೇಂದ್ರರಾವ್, ಕಾಮ್ರೇಡ್ ಲಿಂಗಪ್ಪ, ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್, ಪಬ್ಲಿಕ್ ಟಿವಿ ವರದಿಗಾರ ಶಶಿಧರ್, ಬಿ-ಟಿವಿ ವರದಿಗಾರ ಅನಿಲ್ ಹಾಗೂ ಸಾಗರದ ಪತ್ರಕರ್ತ ಓಂಕಾರ್ ತಾಳಗುಪ್ಪ ಅವರಿಗೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ಡಿ.ಜಿ. ನಾಗರಾಜ್ ತಿಳಿಸಿದರು.
“ ಸಂಘಟನೆಯು ಮೀಡಿಯಾ, ನಾನ್ ಮೀಡಿಯಾ ಎಂಬ ಭೇದಭಾವ ಮಾಡದೆ, ಜಿಲ್ಲೆಯ ಎಲ್ಲಾ ಸಮಾನ ಮನಸ್ಕ ಪತ್ರಕರ್ತರನ್ನು ಒಗ್ಗೂಡಿಸುವ ಆಶಯ ಹೊಂದಿದೆ. ಈ ಕಾರ್ಯಕ್ರಮಕ್ಕೆ ವಿವಿಧ ಪತ್ರಿಕಾ ಸಂಘಟನೆಗಳ ಪತ್ರಕರ್ತರು, ಗಣ್ಯರು ಹಾಗೂ ಸಂಘ-ಸಂಸ್ಥೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಅವರು ಮನವಿ ಮಾಡಿದರು.


