I ಮೇ 17ಕ್ಕೆ ಶಿವಮೊಗ್ಗ ಕೆಯುಡಬ್ಲ್ಯೂಜೆ ವತಿಯಿಂದ ಪತ್ರಕರ್ತರ ಕ್ರೀಡಾಕೂಟ I ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ I
ಶಿವಮೊಗ್ಗ : ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಮೇ 17ರಂದು ವಾರ್ಷಿಕ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಯು.ವೈದ್ಯನಾಥ್ ತಿಳಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಯುವಜನ ಸೇವಾ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೇಖಾನಾಯ್ಕ, ಸಂಘದ ರಾಜ್ಯ ಸಮಿತಿ ನಿರ್ದೇಶಕರಾದ ಕೆ.ವಿ.ಶಿವಕುಮಾರ್ ಹಾಗೂ ಎನ್.ರವಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಹುಚ್ರಾಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಾದ ಸಿದ್ದಾರ್ಥ ಎ.ಕಶ್ಯಪ, ಧೃವ ಎಸ್.ಹೆಗಡೆ, ದಿಶಾಂತ್ ಕೆ.ಆರ್., ಎನ್.ಸಾನ್ವಿ, ಭಾವನ ಎಸ್., ಎಚ್.ವೈ.ಚೇತನಾ, ತನ್ನಿಷ್ಕಾ, ಎ.ಸಂಜನ, ಎನ್.ವರ್ಷಿಣಿ, ಯದುವೀರ್ ಸಿಂಗ್, ನೂರೈನ್ ಫಾತಿಮಾ, ಆದಿತ್ಯ ಎಸ್. ಹಾಗೂ ಎಂ.ಎಸ್.ಸಾತ್ವಿಕ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಚಿನ್ನದ ಪದಕ ವಿಜೇತೆ ಪ್ರೇರಣಾ ಕೆ.ರಾವ್ ಹಾಗೂ ಬಿಎಎಂಎಸ್ನಲ್ಲಿ ನಾಲ್ಕನೇ ರ್ಯಾಂಕ್ ಪಡೆದ ಕೆ.ಎಸ್.ಲಲಿತೇಶ್ವರಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುವುದು ಎಂದರು,
ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಹಾಗೂ ರಾಜ್ಯ ಸಮಿತಿ ನಿರ್ದೇಶಕರಾದ ಕೆ.ವಿ.ಶಿವಕುಮಾರ್ ಮತ್ತು ಎನ್.ರವಿಕುಮಾರ್ ಅವರಿಗೆ ಗೌರವ ಸಮರ್ಪಿಸಲಾಗುವುದು. ಹಾಗೆಯೇ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರ್.ಪಿ.ಭರತ್ರಾಜ್ ಸಿಂಗ್, ಡಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ ಪುರಸ್ಕೃತ ಶರತ್ಕುಮಾರ್, ಅಭಿಮಾನಿ ಪ್ರಕಾಶನ ಪ್ರಶಸ್ತಿ ಪುರಸ್ಕೃತ ಮಹೇಶ್ ಹೆಗಡೆ ಹಾಗೂ ಗಣೇಶ್ ಜಿ.ದತ್ತಿ ಪ್ರಶಸ್ತಿ ಪುರಸ್ಕೃತ ಅರುಣ್ ಮಾಸಡಿ ಅವರನ್ನು ಸಾಧಕ ಪತ್ರಕರ್ತರಾಗಿ ಸನ್ಮಾನಿಸಲಾಗುವುದು ಎಂದು ಹೇಳಿದರು. ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಜಿಪಂ ಸಿಇಒ ಎನ್.ಹೇಮಂತ್, ರಾಜ್ಯ ಸಂಘದ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಪಾಲಿಕೆ ಆಯುಕ್ತ ಮಾಯಣ್ಣಗೌಡ, ವಾರ್ತಾ ಇಲಾಖೆ ಅಧಿಕಾರಿ ಭಾಗ್ಯ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಉಪಾಧ್ಯಕ್ಷ ಹೊನ್ನಾಳಿ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ಉಪಾಧ್ಯಕ್ಷರಾದ ಕೆ.ಎಸ್.ಹುಚ್ರಾಯಪ್ಪ, ಟಿ.ಸತ್ಯನಾರಾಯಣ, ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿ ಕೆ.ಆರ್.ಸೋಮಶೇಖರ್, ಖಜಾಂಚಿ ಎಸ್.ಆರ್.ರೋಹಿತ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ವಿ.ಶೆಟ್ಟಿ ಇದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :
ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಸಾಧಕ ಪತ್ರಕರ್ತರಿಗೆ ಗೌರವ :
ಮಾಧ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಹಿರಿಯ ಹಾಗೂ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತಿದೆ. ವಿವಿಧ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಪತ್ರಕರ್ತರಿಗೆ ಗೌರವ ಸಲ್ಲಿಸುವ ಮೂಲಕ ಮಾಧ್ಯಮ ಕ್ಷೇತ್ರದ ಸೇವೆಯನ್ನು ಸ್ಮರಿಸಲಾಗುತ್ತಿದೆ.

